ಭಟ್ಕಳ: ತಾಲ್ಲೂಕಿನ ಮುರುಡೇಶ್ವರದ ರೈಲ್ವೆ ಸ್ಟೇಷನ್ ಹತ್ತಿರ ಸ್ಕೂಟಿ ಸವಾರನೊಬ್ಬನನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರು ಹಲ್ಲೆ ನಡೆಸಿ, ಆತನ ಬಳಿಯಿದ್ದ ಚಿನ್ನದ ಸರ ಕಳವು ಮಾಡಿರುವ ಘಟನೆ ನಡೆದಿದೆ.
ಮಾವಳ್ಳಿ ಗುಮ್ಮನಕಲ್ ನಿವಾಸಿ ಹಾಗೂ ಆರ್ಎನ್ಎಸ್ ಡಿಪ್ಲೋಮಾ ಕಾಲೇಜಿನ ಲ್ಯಾಬ್ ಇಂಚಾರ್ಜ್ ಅರುಣ್ ಕುಮಾರ್ ಮಂಗಳಮುಖಿಯರಿಂದ ಹಲ್ಲೆಗೊಳಗಾದ ದುರ್ದೈವಿಯಾಗಿದ್ದಾನೆ. ರಾತ್ರಿ ಕೆಲಸ ಮುಗಿಸಿಕೊಂಡು ಪೆಟ್ರೋಲ್ ಬಂಕ್ನಲ್ಲಿ ಇಂಧನ ತುಂಬಿಸಿಕೊಂಡ ಬಳಿಕ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಮೂಲಕ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಆ ಸಮಯದಲ್ಲಿ ಇಬ್ಬರು ಮಂಗಳಮುಖಿಯರು ಅರುಣ್ ಕುಮಾರ್ ಅವರನ್ನು ಅಡ್ಡಗಟ್ಟಿ ಮಾತನಾಡುವ ನೆಪದಲ್ಲಿ ತಡೆದರೆ, ಕೆಲವೇ ಕ್ಷಣಗಳಲ್ಲಿ ಇನ್ನಿಬ್ಬರು ಮಹಿಳೆಯರು ಸ್ಥಳಕ್ಕೆ ಬಂದು ಸೇರಿದ್ದಾರೆ. ಮಾತುಕತೆ ವೇಳೆ ಅಸಭ್ಯ ವರ್ತನೆ ತೋರಿದ ಆರೋಪಿಗಳು ಅರುಣ್ ಕುಮಾರ್ ಅವರ ಕುತ್ತಿಗೆಯಲ್ಲಿದ್ದ ಸುಮಾರು ₹1 ಲಕ್ಷ ಮೌಲ್ಯದ ಬಂಗಾರದ ಸರವನ್ನು ಕಿತ್ತುಕೊಂಡು ಎಲ್ಲರೂ ಸೇರಿ ಸ್ಥಳದಿಂದ ಪರಾರಿಯಾದರೆಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.






