ತುಮಕೂರು: ಜಿಲ್ಲೆಯ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾವಿ ಕ್ರಾಸ್ ಸಮೀಪ ಇಂದು ಮುಂಜಾನೆ ಸುಮಾರು 5 ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೆಂಕಟೇಶ್ (30), ಮಾರುತ್ತಪ್ಪ (44), ಮತ್ತು 7 ವರ್ಷದ ಬಾಲಕಿ ಸಾಕ್ಷಿ ಮೃತಪಟ್ಟವರು. ಮತ್ತೊಬ್ಬ ಮೃತನ ಗುರುತು ಇನ್ನೂ ಪತ್ತೆಯಾಗಬೇಕಿದೆ. ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ಮೂಲದವರು ಎಂದು ತಿಳಿದುಬಂದಿದೆ.
ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದೆ. ಕ್ರೂಸರ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂದಿನ ಸೀಟಿನಲ್ಲಿ ಕುಳಿತಿದ್ದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಕ್ರೂಸರ್ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ 6 ಭಕ್ತರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ (SP Ashok Venkat)ಹಾಗೂ ಕೋರಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾನೆಯ ಮಂಜಿನ ಮುಸುಕು ಅಥವಾ ಚಾಲಕನ ನಿದ್ದೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.






