ಬಳ್ಳಾರಿ: ಬಳ್ಳಾರಿಯ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯೊಬ್ಬರ ಬೆತ್ತಲೆ ಮೃ*ತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಮೃ*ತ ಮಹಿಳೆಯನ್ನು ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಹಾಗೂ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಉದ್ಯೋಗಿ ಅನಿಷಾ ಫಾತೀಮಾ (38) ಎಂದು ಗುರುತಿಸಲಾಗಿದೆ.
ಹಳ್ಳದ ಪಕ್ಕದಲ್ಲಿರುವ ಜಾಲಿ ಬೇಲಿಯಲ್ಲಿ ಕಸಕಡ್ಡಿಗಳ ನಡುವೆ ಫಾತೀಮಾ ಅವರ ಮೃ*ತದೇಹ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮೃ*ತದೇಹ ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದ್ದರೂ, ಮೃತದೇಹವು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ. ಇದು ಕೊ*ಲೆಯೋ ಅಥವಾ ಆಕಸ್ಮಿಕ ಸಾವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃ*ತ ಅನಿಷಾ ಫಾತೀಮಾ ಅವರು ಶನಿವಾರ ರಾತ್ರಿ ತಮ್ಮ ಬ್ಯಾಂಕ್ ಸಿಬ್ಬಂದಿಯೊಂದಿಗೆ ಪಾರ್ಟಿಗೆ ಹೋಗಿದ್ದರು ಎನ್ನಲಾಗಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅವರು ತಮ್ಮ ಪತಿಗೆ ಫೋನ್ ಮಾಡಿ ಮಾತನಾಡಿದ್ದರು. ಆದರೆ ಆ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ದಿಢೀರನೆ ಮರುದಿನ ಬೆಳಿಗ್ಗೆ ಹಳ್ಳದಲ್ಲಿ ಅವರ ಬೆತ್ತಲೆ ಮೃ*ತದೇಹ ಪತ್ತೆಯಾಗಿರುವುದು ಕುಟುಂಬಸ್ಥರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಬಳ್ಳಾರಿಯ ಎಪಿಎಂಸಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾರ್ಟಿಗೆ ಹೋಗಿದ್ದಾಗ ಏನಾಯಿತು? ಪತಿಗೆ ಕರೆ ಮಾಡಿದ ಬಳಿಕ ನಡೆದ ಘಟನೆಗಳೇನು? ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿನ ನಿಖರ ಕಾರಣ ಸ್ಪಷ್ಟವಾಗುವ ಸಾಧ್ಯತೆಯಿದೆ.
