S Shorts

ಕಾವೇರಿ ಕಿಚ್ಚು ತೀವ್ರ; ದೆಹಲಿಯಲ್ಲಿ ಇಂದು CWMA ತುರ್ತು ಸಭೆ, ‘ಕರ್ನಾಟಕ ಬಂದ್’ಗೆ ಚಿಂತನೆ!

ಕಾವೇರಿ ಕಿಚ್ಚು ತೀವ್ರ; ದೆಹಲಿಯಲ್ಲಿ ಇಂದು CWMA ತುರ್ತು ಸಭೆ, ‘ಕರ್ನಾಟಕ ಬಂದ್’ಗೆ ಚಿಂತನೆ!
Author: Sagaradventure
Posted By: Sagaradventure
Updated: Jul 30, 2026 | 12:42 PM

ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶದ ವಿರುದ್ಧ ರೈತರು ಹಾಗೂ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. 

ಈ ಬಿಕ್ಕಟ್ಟಿನ ನಡುವೆಯೇ, ಇಂದು ಮಧ್ಯಾಹ್ನ 2:30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ತಮಿಳುನಾಡಿಗೆ ನೀರು ಹರಿಸುವ ವಿವಾದಾತ್ಮಕ ಆದೇಶದ ಕುರಿತು ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಮತ್ತೊಂದೆಡೆ, ಪ್ರಾಧಿಕಾರದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಭೆಯಲ್ಲಿ ರಾಜ್ಯದ ಪರವಾಗಿ ಪ್ರಬಲ ವಾದ ಮಂಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಕಾವೇರಿ ನೀರು ಹರಿಸುವುದನ್ನು ತೀವ್ರವಾಗಿ ಖಂಡಿಸಿರುವ ಕನ್ನಡ ಸಂಘಟನೆಗಳು, ಕಾವೇರಿ ಉಳಿವಿಗಾಗಿ ರಾಜ್ಯವ್ಯಾಪಿ ‘ಕರ್ನಾಟಕ ಬಂದ್’ಗೆ ಕರೆ ನೀಡುವ ಸಾಧ್ಯತೆ ದಟ್ಟವಾಗಿದೆ. 

ಈ ಕುರಿತು ಶುಕ್ರವಾರ ಬೆಂಗಳೂರಿನ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ಸಂಘಟನೆಗಳ ಮಹತ್ವದ ಸಭೆ ಕರೆಯಲಾಗಿದ್ದು, ಬಂದ್ ದಿನಾಂಕ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.