ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿಯಾಗಿ (CM-designate) ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡುತ್ತಿದ್ದಂತೆ, ರಾಜ್ಯ ರಾಜಕಾರಣದಲ್ಲಿ ನೂತನ ಸಚಿವ ಸಂಪುಟ ರಚನೆಯ ಬಿರುಸಿನ ಕಸರತ್ತು ಆರಂಭವಾಗಿದೆ. ಭಾರಿ ಭದ್ರತೆಯ ನಡುವೆಯೂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಮಾಜಿ ಸಚಿವರು ಹಾಗೂ ಆಕಾಂಕ್ಷಿ ಶಾಸಕರ ದಂಡೇ ಹರಿದುಬರುತ್ತಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಶುರುವಾಗಿದೆ.
ಪವರ್ ಸೆಂಟರ್ ಆದ ಸದಾಶಿವನಗರ ನಿವಾಸ!
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪ್ರೋಟೋಕಾಲ್ ಪ್ರಕಾರ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರ ಹಾಗೂ ಕಾರ್ಯಕರ್ತರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ ಸಚಿವ ಸ್ಥಾನದ ಡಿಮ್ಯಾಂಡ್ ಮುಂದಿಟ್ಟುಕೊಂಡು ಹಲವು ಪ್ರಮುಖ ನಾಯಕರು ಅವರನ್ನು ಖುದ್ದಾಗಿ ಭೇಟಿ ಮಾಡುತ್ತಿದ್ದಾರೆ.
ಭೇಟಿ ನೀಡಿದ ಪ್ರಮುಖರು: ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಕೆ.ಹೆಚ್. ಮುನಿಯಪ್ಪ, ಟಿ.ಬಿ. ಜಯಚಂದ್ರ.
ಆಕಾಂಕ್ಷಿ ಶಾಸಕರು: ಪುಟ್ಟರಂಗಶೆಟ್ಟಿ, ಅಶೋಕ್ ಪಟ್ಟಣ್, ಕೆ.ವೈ. ನಂಜೇಗೌಡ, ಗಣೇಶ್ ಹುಕ್ಕೇರಿ ಸೇರಿದಂತೆ ಹಲವರು ಡಿಕೆಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಂಪುಟ ಫೈನಲ್ ಮಾಡಲು ನಾಳೆಯೇ ದೆಹಲಿಗೆ ಡಿಕೆಶಿ, ಸಿದ್ದು ಪಯಣ
ಒಂದೆಡೆ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಒತ್ತಡ ಹೇರುತ್ತಿದ್ದಂತೆ, ಅಂತಿಮ ಪಟ್ಟಿ ಸಿದ್ಧಪಡಿಸಲು ಡಿ.ಕೆ. ಶಿವಕುಮಾರ್ ಅವರು ನಾಳೆಯೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ, ಜೂನ್ 3 ರಂದು ತಮ್ಮೊಂದಿಗೆ ಎಷ್ಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಬೇಕು ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಇನ್ನೊಂದೆಡೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಆಪ್ತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪಟ್ಟು ಹಿಡಿದಿದ್ದು, ನಾಳೆ ಬೆಳಗ್ಗೆ 9:30ಕ್ಕೆ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ.
ಡಿಕೆಶಿ ಸ್ಪಷ್ಟನೆ: “ಯಾರು ಯಾರು ಸಚಿವರಾಗುತ್ತಾರೆ ಎಂಬುದನ್ನು ದೆಹಲಿ ಹೈಕಮಾಂಡ್ ನಿರ್ಧರಿಸುತ್ತದೆ. ಈ ಬಗ್ಗೆ ನನಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿಯಿಲ್ಲ” ಎಂದು ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ
ಸಚಿವ ಸಂಪುಟ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದು, ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಗೆ ಅಚ್ಚರಿ ಮೂಡಿಸಿದ್ದಾರೆ.
ಡಿಸಿಎಂ ಪ್ರಸ್ತಾವನೆ ಇಲ್ಲ: “ಉಪಮುಖ್ಯಮಂತ್ರಿ ಸ್ಥಾನಗಳ ಸೃಷ್ಟಿ ಬಗ್ಗೆ ನಮಗೆ ಇನ್ನೂ ಯಾವುದೇ ಪ್ರಪೋಸಲ್ ಬಂದಿಲ್ಲ. ಜೂನ್ ೩ ರ ನಂತರ ಈ ಬಗ್ಗೆ ನಿರ್ಧಾರ ಮಾಡುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.
ಹಂತ ಹಂತವಾಗಿ ಸಂಪುಟ ವಿಸ್ತರಣೆ: ಸಿಎಂ ಜೊತೆ ಎಷ್ಟು ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ, 15 ದಿನಗಳ ಬಳಿಕ ಮತ್ತೊಮ್ಮೆ ಸಂಪುಟ ವಿಸ್ತರಣೆಯಾಗಲಿದೆ.
ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ನಡುವೆ ಉತ್ತಮ ಹೊಂದಾಣಿಕೆ ಇರಬೇಕು. ಅಂತಹ ಸಮರ್ಥ ವ್ಯಕ್ತಿಯನ್ನೇ ಮುಂದಿನ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
