S Shorts

KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರು ಗಂಭೀರ

KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರು ಗಂಭೀರ
Author: Sagaradventure
Posted By: Sagaradventure
Updated: Jul 12, 2026 | 3:06 PM

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಬಳಿ ಪ್ರಯಾಣಿಕರ ಬಸ್ ಹಾಗೂ ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಘೋರ ಅಪಘಾತದಲ್ಲಿ ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿಯ ರಭಸಕ್ಕೆ ವಾಹನಗಳ ಮುಂಭಾಗ ಜಖಂಗೊಂಡಿದ್ದು, ಘಟನಾ ಸ್ಥಳದಲ್ಲಿ ಪ್ರಯಾಣಿಕರ ಆಕ್ರಂದನ ಮುಗಿಲುಮುಟ್ಟಿತ್ತು.

​ಹಾನಗಲ್‌ನಿಂದ ಮುಂಡಗೋಡಿಗೆ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಬಸ್ ಹಾಗೂ ಮುಂಡಗೋಡಿನಿಂದ ಶಿರಸಿ ಕಡೆಗೆ ವೇಗವಾಗಿ ತೆರಳುತ್ತಿದ್ದ ಲಾರಿ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ರಸ್ತೆಯ ತಿರುವಿನಲ್ಲಿ ಅಥವಾ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಅಪಘಾತದ ತಕ್ಷಣವೇ ಸ್ಥಳೀಯರು ಓಡಿಬಂದು ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ನೆರವಾಗಿದ್ದಾರೆ.

​ಹುಬ್ಬಳ್ಳಿ ಕಿಮ್ಸ್‌ಗೆ ಐವರು ಗಂಭೀರ ಗಾಯಾಳುಗಳ ರವಾನೆ

ಅಪಘಾತದಲ್ಲಿ ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಆಂಬ್ಯುಲೆನ್ಸ್ ಹಾಗೂ ಸ್ಥಳೀಯ ವಾಹನಗಳ ಮೂಲಕ ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ಐದು ಜನರ ಪರಿಸ್ಥಿತಿ ತೀರಾ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಮತ್ತು ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಮುಂಡಗೋಡು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.