ಬೆಂಗಳೂರು: ಯೂತ್ ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಘಟಕದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಿದ್ದು, ಜಿಲ್ಲಾ ಉಪಾಧ್ಯಕ್ಷೆ ಅಫ್ರೀನ್ ಖಾನ್ (Afreen Khan) ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಈ ಕಠಿಣ ಕ್ರಮ ಕೈಗೊಂಡಿದೆ.
ಉಚ್ಚಾಟನೆಗೆ ಕಾರಣವೇನು?
ಇತ್ತೀಚೆಗೆ ನಡೆದ ಉಪಚುನಾವಣೆಯ ಸಂದರ್ಭದಲ್ಲಿ ಅಫ್ರೀನ್ ಖಾನ್ ಅವರು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಚುನಾವಣಾ ಸಮಯದಲ್ಲಿ ಪಕ್ಷದ ನಾಯಕರ ವಿರುದ್ಧ ಮಾತನಾಡಿದ್ದು ಮತ್ತು ಪಕ್ಷದ ಆಂತರಿಕ ಶಿಸ್ತನ್ನು ಉಲ್ಲಂಘಿಸಿರುವುದು ಉಚ್ಚಾಟನೆಗೆ ಮುಖ್ಯ ಕಾರಣವಾಗಿದೆ.
ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕಿದ್ದ ಸಮಯದಲ್ಲಿ ನಾಯಕರ ವಿರುದ್ಧವೇ ತಿರುಗಿ ಬಿದ್ದದ್ದು ಪಕ್ಷಕ್ಕೆ ಮುಜುಗರ ಉಂಟುಮಾಡಿದೆ ಎಂದು ಯೂತ್ ಕಾಂಗ್ರೆಸ್ ಮುಖಂಡರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಉಪಚುನಾವಣೆಯ ಅತೀ ಮುಖ್ಯ ಘಟ್ಟದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಗಂಭೀರವಾದ ತಪ್ಪು ಎಂದು ಪರಿಗಣಿಸಿರುವ ಹೈಕಮಾಂಡ್ ಮತ್ತು ಯೂತ್ ಕಾಂಗ್ರೆಸ್ ಸಮಿತಿ, ಅಫ್ರೀನ್ ಖಾನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾನದಿಂದ ವಜಾಗೊಳಿಸಿದೆ. ಈ ಮೂಲಕ ಪಕ್ಷದ ಶಿಸ್ತನ್ನು ಕಾಪಾಡುವಲ್ಲಿ ರಾಜಿ ಇಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸಿದೆ.
