ಬೆಂಗಳೂರು: ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಕ್ಷುಲ್ಲಕ ಜಗಳ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಲಗ್ಗೇರಿ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಮೊಹಮ್ಮದ್ ಯೂನಸ್ ಎಂಬಾತನನ್ನು ಬಂಧಿಸಿದ್ದಾರೆ. ಕೊ*ಲೆಯಾದ ವ್ಯಕ್ತಿಯನ್ನು ವೃತ್ತಿಯಲ್ಲಿ ಅಡುಗೆ ಭಟ್ಟನಾಗಿದ್ದ ಕುಮಾರ್ ಎಂದು ಗುರುತಿಸಲಾಗಿದೆ.
ರಸ್ತೆ ಬದಿಯಲ್ಲಿ ಕುಮಾರ್ ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ, ಅಲ್ಲೇ ಇದ್ದ ಮೊಹಮ್ಮದ್ ಯೂನಸ್ ಯಾಕೆ ಇಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಕುಪಿತಗೊಂಡ ಕುಮಾರ್ ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಕುಮಾರ್ ಜೊತೆಯಲ್ಲಿದ್ದ ವ್ಯಕ್ತಿಯೊಬ್ಬ ಆತನನ್ನು ಸಮಾಧಾನಪಡಿಸಿ ಕರೆದುಕೊಂಡು ಬಂದಿದ್ದ. ಆದರೆ, ಜಗಳ ಅಷ್ಟಕ್ಕೇ ನಿಂತಿರಲಿಲ್ಲ.
ಸ್ವಲ್ಪ ಸಮಯದ ಬಳಿಕ ಕುಮಾರ್ ವಾಹನದ ಮೇಲೆ ಕುಳಿತಿದ್ದಾಗ ಅಲ್ಲಿಗೆ ಬಂದ ಯೂನಸ್, ಆತನ ಮುಖಕ್ಕೆ ಜೋರಾಗಿ ಪಂಚ್ ಮಾಡಿದ್ದಾನೆ. ಏಟಿನ ರಭಸಕ್ಕೆ ಕೆಳಗೆ ಬಿದ್ದ ಕುಮಾರ್ ಸ್ಥಳದಲ್ಲೇ ಮೃ*ತಪಟ್ಟಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಯೂನಸ್ನನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
