ಕಲಬುರಗಿ ಜಿಲ್ಲೆಯ ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಫ್ಯಾನಿಗೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಜೂನ್ 24ರ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃ*ತ ದುರ್ದೈವಿಯನ್ನು 19 ವರ್ಷದ ಚಂದ್ರಿಕಾ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ.
ಚಂದ್ರಿಕಾ ಮೂಲತಃ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಇ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಕೋಣೆಯಲ್ಲಿ ಒಬ್ಬಳೇ ಇದ್ದಾಗ ದುರಂತ
ಮೃ*ತ ವಿದ್ಯಾರ್ಥಿನಿಗೆ ಕಳೆದ ಕೆಲವು ದಿನಗಳಿಂದ ಆರೋಗ್ಯ ಸರಿ ಇರಲಿಲ್ಲ ಎಂಬ ಕಾರಣಕ್ಕೆ ಆಕೆ ಕಾಲೇಜಿಗೆ ಹೋಗದೆ ವಸತಿ ನಿಲಯದ ಕೋಣೆಯೊಂದರಲ್ಲಿ ಒಬ್ಬಳೇ ಉಳಿದುಕೊಂಡಿದ್ದಳು ಎನ್ನಲಾಗಿದೆ. ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ವಸತಿ ನಿಲಯದಲ್ಲಿ ಇತರ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ಆಕೆ ತನ್ನ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಮಗಳ ಸಾ*ವಿನ ಸುದ್ದಿ ತಿಳಿಯುತ್ತಿದ್ದಂತೆ ವಸತಿ ನಿಲಯಕ್ಕೆ ಧಾವಿಸಿದ ಪಾಲಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಸೇಡಂ ಸಿಪಿಐ ಮಹಾದೇವ ದಿಡ್ಡಿಮನಿ ಹಾಗೂ ಪಿಎಸ್ಐ ಉಪೇಂದ್ರ ಕುಮಾರ್ ಅವರು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಶರಣಪ್ಪ, ರಾಮರೆಡ್ಡಿ, ನಾಗರಾಜ, ಬಾಲಕೃಷ್ಣರೆಡ್ಡಿ ಮತ್ತು ದೇವಕಿ ಉಪಸ್ಥಿತರಿದ್ದರು. ಪೊಲೀಸರು ಸದ್ಯ ಮೃ*ತದೇಹವನ್ನು ವಶಕ್ಕೆ ಪಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
