ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಹಿನ್ನೆಲೆ, ಸಮರ್ಪಕ ಪೊಲೀಸ್ ಭದ್ರತೆ ದೊರೆಯದ ಕಾರಣ ಬಿಬಿಎಂಪಿ (BBMP) ಎರಡು ದಿನಗಳ ಕಾಲ ‘ಆಪರೇಷನ್ ಫುಟ್ಪಾತ್’ ಅನ್ನು ಸ್ಥಗಿತಗೊಳಿಸಿದೆ.
ಶಿವಾಜಿನಗರದ ವಿವಿಧ ಭಾಗಗಳಲ್ಲಿ ಫುಟ್ಪಾತ್ಗಳ ಮೇಲೆ ವ್ಯಾಪಕ ಒತ್ತುವರಿ ನಡೆದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕಾರ್ಯಾಚರಣೆ ವೇಳೆ ಕೆಲ ದುಷ್ಕರ್ಮಿಗಳು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಈ ಘಟನೆ ಬಳಿಕ ಮುಂದಿನ ಹಂತದ ಕಾರ್ಯಾಚರಣೆಗೆ ಪೊಲೀಸ್ ಭದ್ರತೆ ಕೋರಲಾಗಿತ್ತು. ಆದರೆ ಇನ್ನೂ ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆಗೆ ಅನುಮತಿ ದೊರೆಯದ ಕಾರಣ ಸದ್ಯಕ್ಕೆ ತೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒತ್ತುವರಿ ತೆರವು ಪುನರಾರಂಭವಾದರೆ ಮತ್ತೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇರುವುದರಿಂದ, ಸಮರ್ಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ ಬಳಿಕವೇ ಕಾರ್ಯಾಚರಣೆ ಮುಂದುವರಿಸಲು ಬಿಬಿಎಂಪಿ ನಿರ್ಧರಿಸಿದೆ.
ಶಿವಾಜಿನಗರದ ಹಲವು ರಸ್ತೆಗಳಲ್ಲಿ ಫುಟ್ಪಾತ್ಗಳು ಅತಿಕ್ರಮಣಕ್ಕೆ ಒಳಗಾಗಿರುವುದರಿಂದ ಪಾದಚಾರಿಗಳು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪೊಲೀಸ್ ಭದ್ರತೆ ದೊರೆತ ತಕ್ಷಣ ಮತ್ತೆ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಪಾಲಿಕೆ ಮೂಲಗಳು ತಿಳಿಸಿವೆ.
